ಬೆಂಗಳೂರು: 2024ರ ಲೋಕಸಭೆ ಚುನಾವಣೆಗೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿದೆ ಎಂದು ಹೇಳುವ ಮೂಲಕ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೊಸ ಸಂಚಲನ ಒಂದನ್ನು ಸೃಷ್ಟಿಸಿದ್ದಾರೆ.
ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಬಿಎಸ್ ವೈ ಕೇಂದ್ರ ಗೃಹ ಸಚಿವ ಅಮಿತ್ ಷಾರವರು ಬಿಜೆಪಿ-ಜೆಡಿಎಸ್ ಮೈತ್ರಿಗೆ ಒಪ್ಪಿದ್ದಾರೆ. 4 ಸ್ಥಾನಗಳನ್ನು ಬಿಟ್ಟುಕೊಡಲು ಸೂಚಿಸಿರುವುದಾಗಿ ತಿಳಿಸಿದ್ದಾರೆ.
ಜೆಡಿಎಸ್ ಜೊತೆಗಿನ ಮೈತ್ರಿಯಿಂದ ನಮಗೆ ಇನ್ನಷ್ಟು ಶಕ್ತಿ ಬರುತ್ತದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ 25ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಈ ಮೈತ್ರಿ ಸಹಕಾರಯಾಗಲಿದೆ. ಈ ಸಂಬಂಧ ಶೀಘ್ರದಲ್ಲೇ ಮತ್ತಷ್ಟು ಮಾಹಿತಿ ನೀಡಲಾಗುವುದು ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಸುದ್ದಿ ಮೂಲಗಳ ಪ್ರಕಾರ ಪ್ರಜ್ವಲ್ ರೇವಣ್ಣ ಅನರ್ಹತೆ ಸಂಬಂಧ ವಕೀಲರೊಂದಿಗೆ ಚರ್ಚಿಸಲು ಇತ್ತೀಚಿಗೆ ದೇವೇಗೌಡರು ದೆಹಲಿಗೆ ತೆರಳಿದ್ದರು. ಈ ವೇಳೆ ಅವರು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು ಎನ್ನಲಾಗಿದೆ. ಉಭಯ ನಾಯಕರ ನಡುವೆ ಮೈತ್ರಿ ಬಗ್ಗೆ ಅನೌಪಚಾರಿಕ ಚರ್ಚೆ ನಡೆದಿತ್ತು ಎನ್ನಲಾಗಿದೆ.
ಜೆಡಿಎಸ್ ಪ್ರಾಬಲ್ಯ ಹೆಚ್ಚಿರುವ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಹಾಸನ ಹಾಗೂ ಮಂಡ್ಯದಲ್ಲಿ ಸ್ಪರ್ಧಿಸಬಹುದು ಎಂದು ಅಂದಾಜಿಸಲಾಗಿದೆ. ಉಳಿದ ಕಡೆ ಬಿಜೆಪಿ ಅಭ್ಯರ್ಥಿಗಳಿಗೆ ಬೆಂಬಲಿಸುವುದಾಗಿ ಉಭಯ ನಾಯಕರ ನಡುವೆ ಮಾತುಕತೆ ನಡೆದಿತ್ತು ಎನ್ನಲಾಗಿದೆ. ಒಂದು ವೇಳೆ ಬಿಜೆಪಿ ಹೈಕಮಾಂಡ್ ದೇವೇಗೌಡರ ಷರತ್ತಿಗೆ ಒಪ್ಪಿದ್ದಲ್ಲಿ ಸೆಪ್ಟೆಂಬರ್ 10ರ ನಂತರ ಮೈತ್ರಿ ನಿರ್ಧಾರ ಪ್ರಕಟವಾಗಲಿದೆ.