ಕಾವೇರಿ ನೀರು: ನಾಳೆ ತುರ್ತು ಸಭೆ ಕರೆದ ಸಿಎಂ ಸಿದ್ದರಾಮಯ್ಯ, ಸರ್ವ ಪಕ್ಷದ ನಾಯಕರಿಗೂ ಆಹ್ವಾನ

0
99

ಬೆಂಗಳೂರು: ತಮಿಳುನಾಡಿಗೆ ಮತ್ತೆ 15 ದಿನ ಐದು ಸಾವಿರ ಕ್ಯೂಸೆಕ್ ನೀರು ಬಿಡುವಂತೆ CWRC ಕರ್ನಾಟಕಕ್ಕೆ ಆದೇಶ ಹೊರಡಿಸಿದೆ. ಇದರ ಬೆನ್ನಲ್ಲೇ, ಮುಂದೆ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗಿದ್ದು, ನಾಳೆ ಮಧ್ಯಾಹ್ನವೂ ತುರ್ತು ಸಭೆ ಕರೆಯಲಾಗಿದೆ. ಈ ಸಭೆಗೆ ಸರ್ವ ಪಕ್ಷಗಳಲ್ಲಿನ ಮಾಜಿ ಮುಖ್ಯಮಂತ್ರಿ, ರಾಜ್ಯಸಭಾ ಸದಸ್ಯರು, ಸಂಸದರಿಗೂ ಆಹ್ವಾನ ನೀಡಲಾಗಿದೆ.

ತಮಿಳುನಾಡಿಗೆ ನೀರು ಹರಿಸುವ ಬಗ್ಗೆ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ಇಂದು ನಡೆದಿದೆ. ವಿಡಿಯೋ ಕಾನ್ಫರೆನ್ಸ್​ ಮೂಲಕ ನಡೆದ ಸಮಿತಿ ಸಭೆಯಲ್ಲಿ ಮತ್ತೆ 15 ದಿನ 5000 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸುವಂತೆ CWRC ಆದೇಶ ಹೊರಡಿಸಿದೆ. ಆದರೆ, ಈ ನಿರ್ಧಾರಕ್ಕೆ ಕರ್ನಾಟಕದ ಅಧಿಕಾರಿಗಳು ಒಪ್ಪಿಗೆ ಸೂಚಿಸಿಲ್ಲ.

ಇದರ ಬೆನ್ನಲ್ಲೇ, ಮುಂದೆ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಕೃಷಿ ಸಚಿವ ಚಲುವರಾಯ ಸ್ವಾಮಿ, ಮೈಸೂರು ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ, ಸಚಿವ ನಾಗೇಂದ್ರ, ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ, ರಾಜಕೀಯ ಸಲಹೆಗಾರ ಗೋವಿಂದರಾಜು, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಎಸಿಎಸ್ ರಜನೀಶ್ ಗೋಯಲ್, ಜಲಸಂಪನ್ಮೂಲ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್ ಸೇರಿದಂತೆ ಸಂಬಂಧಪಟ್ಟ ಹಲವು ಅಧಿಕಾರಿಗಳು ಭಾಗಿಯಾಗಿದ್ದಾರೆ.

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ಸದ್ಯಕ್ಕಿಲ್ಲ. ಕರ್ನಾಟಕ CWRC ಆದೇಶ ಪಾಲಿಸದಿದ್ದರೆ ಮಾತ್ರ ಅದಕ್ಕೂ ಮುನ್ನ ಸಭೆ ನಡೆಯಲಿದೆ.

LEAVE A REPLY

Please enter your comment!
Please enter your name here