ಹಂಪಿ ಉತ್ಸವ : ವಿಶ್ವ ವಿಖ್ಯಾತ ಹಂಪಿ ಉತ್ಸವಕ್ಕೂ ತಟ್ಟಿದ ಬರದ ಬಿಸಿ, ಫೆಬ್ರವರಿಗೆ ಮುಂದೂಡಿಕೆ

0
118

ವಿಜಯನಗರ: ಮಳೆ ಮುನಿಸಿಂದ ನೂರೆಂಟು ಸಂಕಷ್ಟಗಳು ಎದುರಾಗಿವೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಕರ್ನಾಟಕದಾದ್ಯಂತ ಬರದ ಛಾಯೆ ಆವರಿಸಿದ್ದು, ರಾಜ್ಯದ 195 ಬರಪೀಡಿತ ತಾಲ್ಲೂಕುಗಳು ಎಂದು ಸರ್ಕಾರ ಘೋಷಿಸಿದೆ. ಇದೀಗ ಹಂಪಿ ಉತ್ಸವಕ್ಕೂ ಬರದ ಹೊಡೆತ ತಟ್ಟಿದೆ. ಹೌದು…ರಾಜ್ಯದಲ್ಲಿ ಬರ ಪರಿಸ್ಥಿತಿ ಹಿನ್ನಲೆಯಲ್ಲಿ ವಿಶ್ವ ವಿಖ್ಯಾತ ಹಂಪಿ ಉತ್ಸವವನ್ನು ಫೆಬ್ರವರಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ.

ನಿನ್ನೆ(ಸೆಪ್ಟೆಂಬರ್ 13) ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಂಪಿ ಉತ್ಸವವನ್ನು ನವೆಂಬರ್​ ಬದಲಾಗಿ ಫೆಬ್ರವರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ. ರಾಜ್ಯದಲ್ಲಿ ವಿಜಯನಗರ- ಬಳ್ಳಾರಿ ಸೇರಿದಂತೆ ಬಹುತೇಕ ಜಿಲ್ಲೆಗಳ ಹೆಚ್ಚಿನ ಸಂಖ್ಯೆಯ ತಾಲೂಕುಗಳಲ್ಲಿ ಬರ ಪರಿಸ್ಥಿತಿ ಇದೆ. ಹೀಗಾಗಿ ಇಂತಹ ಸ್ಥಿತಿಯಲ್ಲಿ ಉತ್ಸವ ನಡೆಸುವುದು ಕಷ್ಟ. ಫೆಬ್ರವರಿ ವೇಳೆಗೆ ಪರಿಸ್ಥಿತಿ ನೋಡಿಕೊಂಡು ಉತ್ಸವ ಮಾಡುವುದು ಸೂಕ್ತ ಎಂಬ ಅಭಿಪ್ರಾಯ ವ್ಯಕ್ತವಾಯಿತು.

ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮ್ಮದ್ ಖಾನ್, ಈ ಮೊದಲು ನವೆಂಬರ್​ನಲ್ಲಿ ಹಂಪಿ ಉತ್ಸವ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ, ಬರ ಪರಿಸ್ಥಿತಿಯಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉತ್ಸವವನ್ನು ಫೆಬ್ರವರಿಯಲ್ಲಿ ನಡೆಸಿ ಎಂದು ಸಲಹೆ ನೀಡಿದ್ದಾರೆ. ಹೀಗಾಗಿ ಫೆಬ್ರವರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದರು.

LEAVE A REPLY

Please enter your comment!
Please enter your name here