ಕಾವೇರಿ ನೀರಿನ ಸಮಸ್ಯೆಯನ್ನು ಬಗೆಹರಿಸಲು ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿಯಾದ ಸಿದ್ದರಾಮಯ್ಯ

0
112

ನವದೆಹಲಿ, ಸೆ. 21: ತಮಿಳುನಾಡಿಗೆ ಕಾವೇರಿ‌ ನದಿ ನೀರು ಬಿಡುವ ವಿಚಾರದಲ್ಲಿ ಉಂಟಾಗಿರುವ ಬಿಕ್ಕಟ್ಟು ಶಮನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅವರ ಮಂತ್ರಿ ಮಂಡಲದ ಕೆಲ ಸಚಿವರು ದೆಹಲಿಯಲ್ಲಿ ಕಸರತ್ತು ನಡೆಸಿದ್ದಾರೆ. ಇಂದು ಬೆಳಗ್ಗೆ ಸಿದ್ದರಾಮಯ್ಯ ಅವರು ರಾಜ್ಯದ ನಿಯೋಗದೊಂದಿಗೆ ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿದರು. ಈ ವೇಳೆ ಇಂದಿನ ಕಾವೇರಿ ನೀರಿನ ಮಟ್ಟ ಹಾಗೂ ಮುಂದೆ ಎದುರಾಗಲಿರುವ ನೀರಿನ ಸಮಸ್ಯೆ ಬಗ್ಗೆ ವಿವರಿಸಿದ್ದಾರೆ.

ಗಜೇಂದ್ರ ಸಿಂಗ್ ಶೇಖಾವತ್ ಭೇಟಿ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿದ್ದರಾಮಯ್ಯ, ಇಂದು‌ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿದೆವು . ಸಂಸದರು, ಕೇಂದ್ರ ಸಚಿವರು ಹಾಗೂ ಅಧಿಕಾರಿಗಳು ಇದ್ದರು. ಅವರಿಗೆ ಕರ್ನಾಟಕ ವಾಸ್ತಾಂಶ ತಿಳಿಸಿದ್ದೇವೆ. ಅಲ್ಲೇ CWMA ಮಾಡಿದ ಆದೇಶದ ಬಗ್ಗೆ ವಿವರಣೆ ನೀಡಿದ್ದೇನೆ ಎಂದು ಮಾಹಿತಿ ನೀಡಿದರು.

ನಮ್ಮ ಡ್ಯಾಂಗಳಲ್ಲಿ ನೀರಿಲ್ಲ ಎನ್ನುವುದು ಮತ್ತು ನಮಗೆ ಜುಲೈ ವರೆಗೂ ಬೇಕಾದ ನೀರಿನ ಪ್ರಮಾಣದ ಬಗ್ಗೆ ಮಾಹಿತಿ ನೀಡಿದೆ. ಒಟ್ಟು 106 ಟಿಎಂಸಿ ನೀರು ಬೇಕಾಗಬಹುದು. ಆದರೆ ನಮ್ಮ ಬಳಿ 52 ಟಿಎಂಸಿ ನೀರಿದೆ. ಈಗ ನೀರು ಹರಿಸಿದ್ರೆ ಕುಡಿಯುವ ನೀರಿನ ಸಮಸ್ಯೆಯಾಗಲಿದೆ. ಅದನ್ನು ಕೇಂದ್ರ ಸಚಿವರ ಗಮನಕ್ಕೆ ತಂದಿದ್ದೇನೆ. ಅಗಸ್ಟ್ ತಿಂಗಳಲ್ಲಿ ಬಹಳಷ್ಟು ‌ಮಳೆಯ ಕೊರತೆಯಾಗಿದೆ. ಸೆಪ್ಟೆಂಬರ್ ನಲ್ಲೂ ವಾಡಿಕೆಯಂತೆ ‌ಮಳೆಯಾಗಿಲ್ಲ. ಈ ಹಿನ್ನಲೆ ಒಳಹರಿವು ಕಡಿಮೆಯಾಗಿದೆ ಎನ್ನುವ ಅಂಶವನ್ನು ತಿಳಿಸಿದ್ದೇನೆ ಎಂದು ವಿವರಿಸಿದರು.

ಜಲಾಶಯದ ನೀರಿನ ಮಟ್ಟ ನೋಡಿದ್ರೆ ಬೆಳೆ ನಾಶ ಪರಿಸ್ಥಿತಿ ಇದೆ. ರೈತರ ಬೆಳೆ ನಾಶ ಹಾಗೂ ಕುಡಿಯುವ ನೀರಿಗೆ ಸಮಸ್ಯೆ ಎದುರಾಗುತ್ತೆ. ಸುಪ್ರೀಂಕೋರ್ಟ್​ನಲ್ಲಿ ಇವತ್ತು ಅರ್ಜಿ ವಿಚಾರಣೆಗೆ ಬರಲಿದೆ. ಇನ್ನು ಪ್ರಧಾನಮಂತ್ರಿ ಮೋದಿ ಭೇಟಿಗೆ ಇನ್ನೂ ಸಮಯ ನೀಡಿಲ್ಲ ಎಂದರು.

ಗಜೇಂದ್ರ ಸಿಂಗ್ ಶೇಖಾವತ್ ಭೇಟಿ ನಿಯೋಗದಲ್ಲಿ ಕೇಂದ್ರ ಸಚಿವರಾದ ಪ್ರಲ್ಹಾದ ಜೋಷಿ, ಶೋಭಾ ಕರಂದ್ಲಾಜೆ, ರಾಜ್ಯದ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ಕೃಷಿ ಸಚಿವ ಚಲುವರಾಯಸ್ವಾಮಿ, ಕಾನೂನು ಸಚಿವ ಎಚ್.ಕೆ.ಪಾಟೀಲ್, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿಗಳಾದ ಟಿ.ಬಿ.ಜಯಚಂದ್ರ, ಪ್ರಕಾಶ್ ಹುಕ್ಕೇರಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಜಲ ಸಂಪನ್ಮೂಲ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ಜಯರಾಮ್, ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಸೇರಿ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here