ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ಮಂಗಳವಾರ ಬೆಂಗಳೂರು ನಗರ ಬಂದ್

0
110

ಬೆಂಗಳೂರು, ಸೆ.23: ಕಾವೇರಿ ಜಲ ಸಂರಕ್ಷಣಾ ಸಮಿತಿಯ ವತಿಯಿಂದ ರೈತ ಸಂಘಟನೆಗಳ ಒಕ್ಕೂಟ, ಕನ್ನಡಪರ ಸಂಘಟನೆಗಳ ಒಕ್ಕೂಟ ಹಾಗೂ ಬೆಂಗಳೂರಿನ ನಾಗರಿಕ ಸಂಘಗಳ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂಪಾರ್ಕ್​ನಲ್ಲಿ ನಡೆದ ಕಾವೇರಿ ಹೋರಾಟ ಜಾಗೃತಿ ಸಭೆಯಲ್ಲಿ ಮಂಗಳವಾರ ಬೆಂಗಳೂರು‌ ಬಂದ್ ನಡೆಸಲು ತೀರ್ಮಾನಿಸಲಾಗಿದೆ. ಸೆಪ್ಟೆಂಬರ್ 26ರಂದು ಬೆಂಗಳೂರು ನಗರ ಬಂದ್​ಗೆ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಕರೆ ಕೊಟ್ಟಿದೆ. ಸೆ. 26ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಬೆಳಗ್ಗೆ 11 ಗಂಟೆಗೆ ಟೌನ್​ಹಾಲ್​ನಿಂದ SBM ವೃತ್ತದವರೆಗೆ ರ‍್ಯಾಲಿ ಹಮ್ಮಿಕೊಳ್ಳಲಾಗುತ್ತೆ ಎಂದು ಸಭೆ ಬಳಿಕ ಫ್ರೀಡಂಪಾರ್ಕ್​ನಲ್ಲಿ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದರು.

ಬೆಂಗಳೂರು ನಗರ ಬಂದ್​​ಗೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಇನ್ನು ಈ ಬಗ್ಗೆ ಫ್ರೀಡಂಪಾರ್ಕ್​ನಲ್ಲಿ ಕುರುಬೂರು ಶಾಂತಕುಮಾರ್ ಅವರು, ಸೆ.26ರಂದು ಬೆಂಗಳೂರಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸುವಂತೆ ಮನವಿ ಮಾಡಿದ್ದಾರೆ. ಇದು ನಮ್ಮ ಬಂದ್ ಅಲ್ಲ, ಬೆಂಗಳೂರಿನ ನಾಗರಿಕರ ಬಂದ್. ಐಟಿ ಕಂಪನಿಗಳು, ಚಲನಚಿತ್ರ ವಾಣಿಜ್ಯ ಮಂಡಳಿ ಬೆಂಬಲ ನೀಡಬೇಕು. ಸ್ವಯಂಪ್ರೇರಿತವಾಗಿ ಅಂಗಡಿ ಮುಂಗಟ್ಟು ಮುಚ್ಚಿ ಬಂದ್ ಬೆಂಬಲಿಸಬೇಕು. ಸರ್ಕಾರ ಕೂಡಲೇ ವಿಶೇಷ ಅಧಿವೇಶನ ಕರೆದು ನಿರ್ಣಯ ಕೈಗೊಳ್ಳಲಿ. ಸುಪ್ರೀಂಕೋರ್ಟ್​ ಕೂಡಲೇ CWRC, CWMA ರದ್ದು ಮಾಡಬೇಕು ಎಂದು ಕುರುಬೂರು ಶಾಂತಕುಮಾರ್ ಆಗ್ರಹಿಸಿದರು.

ಸಿನಿಮಾ ರಂಗದವರನ್ನ ಜನಸಾಮಾನ್ಯರು ಬೆಳೆಸಿದ್ದಾರೆ. ಸಿನಿಮಾ ನಟರು ಸ್ವಯಂ ಪ್ರೇರಿತವಾಗಿ ಬಂದ್‌ಗೆ ಬರಬೇಕು. ಸಭೆಗೆ ಬಾರದೆ ಇರುವವರನ್ನ ಭೇಟಿಯಾಗಿ ಮಾತನಾಡುತ್ತೇವೆ. ಇಡೀ ಚಿತ್ರೋದ್ಯಮ ಒಂದು ದಿನ ಚಟುವಟಿಕೆ ನಿಲ್ಲಿಸಿ ಬೆಂಬಲ ನೀಡಬೇಕು. ಅಲ್ಲದೆ ಐಟಿ ಕಂಪನಿಗಳು ಸ್ವಯಂ ಪ್ರೇರಿತವಾಗಿ ಕೆಲಸಕ್ಕೆ ಗೈರಾಗಿ ಬೆಂಬಲ ನೀಡಬೇಕು. ಇಂದು ಸರ್ಕಾರ ತಮಿಳುನಾಡಿಗೆ ನೀರನ್ನು ಹರಿಸ್ತಿದ್ದಾರೆ. ಈ ಕೂಡಲೇ ನೀರನ್ನ ಹರಿಸುವ ಕೆಲಸವನ್ನು ನಿಲ್ಲಿಸಬೇಕು. ಕೇಂದ್ರ ಸರ್ಕಾರ ನಿರ್ಲಕ್ಷ್ಯ ಮಾಡಬಾರದು. ಬೆಂಗಳೂರು ನಗರವನ್ನು ಕಾವೇರಿ ನೀರಿನ ವಿಚಾರದಲ್ಲಿ ಸಂಪೂರ್ಣ ನಿರ್ಲಕ್ಷ್ಯ ಮಾಡಿದೆ. ಈಗಾಗಲೇ ಮಂಡ್ಯದಲ್ಲಿ ಬಂದ್ ಮಾಡಿದ್ದಾರೆ. ಮಂಗಳವಾರ ಬೆಂಗಳೂರು ಬಂದ್ ನಿಶ್ಚಿತ ಎಂದು ಕುರುಬೂರು ಶಾಂತಕುಮಾರ್ ಹೇಳಿದರು.

ಮಂಗಳವಾರ ಬೆಂಗಳೂರು ಬಂದ್​ಗೆ ಓಲಾ, ಉಬರ್ ಸಂಘದಿಂದ ಬೆಂಬಲ

ಜಲ ಸಂರಕ್ಷಣಾ ಸಮಿತಿ ಕರೆ ಕೊಟ್ಟಿರುವ ಬೆಂಗಳೂರು‌ ಬಂದ್​ಗೆ ಓಲಾ, ಉಬರ್ ಸಂಘಗಳು ಬೆಂಬಲ ನೀಡಿವೆ. ಬೆಂಗಳೂರಿನಾದ್ಯಂತ ಮಂಗಳವಾರ ಓಲಾ, ಉಬರ್ ಓಡಿಸದಿರಲು ನಿರ್ಧಾರ ಮಾಡಿವೆ. ಈ ಬಗ್ಗೆ ಓಲಾ, ಉಬರ್ ಸಂಘದ ಅಧ್ಯಕ್ಷ ತನ್ವೀರ್ ಪಾಷಾ ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here