ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಸಂಕಷ್ಟ ಎದುರಾಗಿದೆ. ಸಿಬಿಐ ತನಿಖೆ ರದ್ದು ಕೋರಿ ಡಿಕೆಶಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ ಸಿಬಿಐ ತನಿಖೆಗೆ ಗ್ರೀನ್ ಸಿಗ್ನಲ್ ನೀಡಿದೆ.
ಸಿಬಿಐ ತನಿಖೆ ರದ್ದು ಕೋರಿ ಡಿಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು. ಇಂದು ನ್ಯಾಯಮೂರ್ತಿ ಕೆ.ನಟರಾಜನ್ ನೇತೃತ್ವದ ಪೀಠ ಈ ಕುರಿತು ತೀರ್ಪು ನೀಡಿದ್ದು, ತನಿಖೆಗೆ ನೀಡಿದ್ದ ಮಧ್ಯಂತರ ತಡೆಯನ್ನು ತೆರವುಗೊಳಿಸಿ ಇಂದಿನಿಂದಲೇ ಸಿಬಿಐ ಡಿಕೆಶಿ ಅವರನ್ನು ವಿಚಾರಣೆ ನಡೆಸಬಹುದು ಎಂದು ತೀರ್ಪು ನೀಡಿದೆ.
2017ರಲ್ಲಿ ಆದಾಯ ತೆರಿಗೆ ಇಲಾಖೆ ಡಿಕೆ ಶಿವಕುಮಾರ್ ಮೇಲೆ ದಾಳಿ ನಡೆಸಿತ್ತು. ಐಟಿ ಇಲಾಖೆ ನೀಡಿದ ಮಾಹಿತಿ ಆಧರಿಸಿ ಜಾರಿ ನಿರ್ದೇಶನಾಲಯ ಡಿಕೆಶಿ ವಿರುದ್ಧ ತನಿಖೆ ಆರಂಭಿಸಿತ್ತು. ಇಡಿ ತನಿಖೆಯನ್ನು ಆಧರಿಸಿ ಡಿಕೆಶಿ ವಿರುದ್ಧ ಎಫ್ಐಆರ್ ದಾಖಲಿಸಲು ಸಿಬಿಐ ರಾಜ್ಯ ಸರ್ಕಾರದಿಂದ ಅನುಮತಿ ಕೋರಿತ್ತು. ಸರ್ಕಾರ 2019ರ ಸೆ.25ರಂದು ಅನುಮತಿ ನೀಡಿದ ಬೆನ್ನಲ್ಲೇ 2020ರ ಅಕ್ಟೋಬರ್ 3 ರಂದು ಡಿಕೆ ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು.