ಹೆದ್ದಾರಿ ಅಗಲೀಕರಣದ ಕಾಮಗಾರಿ ವೇಳೆ ನೀರಿನ ಪೈಪ್‌ ಗಳಿಗೆ ಹಾನಿ: ಕಾಮಗಾರಿಗೆ ತಡೆಯೊಡ್ಡಿದ ಸ್ಥಳೀಯರು

0
95

ಉಪ್ಪಿನಂಗಡಿ: ಉಪ್ಪಿನಂಗಡಿಯ ಕುಡಿಯುವ ನೀರು ಶುದ್ಧೀಕರಣ ಘಟಕದಿಂದ ಹಲವೆಡೆಗೆ ಸರಬರಾಜಾಗುವ ನೀರಿನ ಪೈಪು ಗಳು ಹೆದ್ದಾರಿ ಅಗಲೀಕರಣದ ಕಾಮಗಾರಿಯ ವೇಳೆ ಹಾನಿಗೊಳಿಸಿದ ಕಾರಣಕ್ಕೆ ಕಳೆದ ನಾಲ್ಕು ದಿನಗಳಿಂದ ನೀರಿಲ್ಲದೆ ಸಂಕಷ್ಟಗೀಡಾದ ಮಂದಿ ಶನಿವಾರ ಆಕ್ರೋಶಗೊಂಡು ಕಾಮಗಾರಿಗೆ ತಡೆಯೊಡ್ಡಿದ ಘಟನೆ ನಡೆದಿದೆ.

ಇದನ್ನು ಸರಿಪಡಿಸಬೇಕೆಂದು ಪಂಚಾಯತ್‌ ಆಡಳಿತವು ಕಾಮಗಾರಿ ನಿರತ ಸಂಸ್ಥೆಯ ಅಧಿಕಾರಿಗಳನ್ನು ಒತ್ತಾಯಿಸಿತ್ತು. ಸ್ಪಂದಿಸುವ ಭರವಸೆ ನೀಡಿದ್ದರೂ ಆಬಳಿಕ ಮೌನ ವಹಿಸಿದ್ದರು. ಇದರಿಂದಾಗಿ ಸತತ ನಾಲ್ಕು ದಿನ ನೀರಿಲ್ಲದೆ ಉಪ್ಪಿನಂಗಡಿ ಪೇಟೆಯ ಜನತೆ ಸಮಸ್ಯೆಗೀಡಾದರು.

ಈ ನಡುವೆ ಶನಿವಾರ ಸ್ಥಳೀಯರು ನೀರಿನ ಪೈಪುಗಳನ್ನು ಸರಿಪಡಿಸದೆ ಕಾಮಗಾರಿ ಮುಂದುವರಿಸಲು ಅವಕಾಶ ನೀಡಬಾರದೆಂದು ಒತ್ತಾಯಿಸಿದರು. ಸ್ಥಳಕ್ಕಾಗಮಿಸಿದ ಪಂಚಾಯತ್‌ ಉಪಾಧ್ಯಕ್ಷೆ ವಿದ್ಯಾಲಕ್ಷ್ಮೀ ಪ್ರಭು ಪಂಚಾಯತ್‌ ಸದಸ್ಯ ಅಬ್ದುಲ್‌ ರಹಿಮಾನ್‌ ನೀರಿನ ಪೈಪುಗಳನ್ನು ಆದ್ಯತೆಯ ಮೇರೆಗೆ ಸರಿಪಡಿಸಿಕೊಡಬೇಕೆಂದು ಒತ್ತಾಯಿಸಿದರು.

ಮಾತ್ರವಲ್ಲದೇ ಜಿ.ಪಂ. ಸಿಇಒ ಅವರಿಗೆ ಸಮಸ್ಯೆಯ ತೀವ್ರತೆಯನ್ನು ತಿಳಿಸಲಾಯಿತು. ಆಬಳಿಕ ಎಚ್ಚೆತ್ತ ಜಿಲ್ಲಾಡಳಿತ ಸಂಬಂಧಿತ ಸಂಸ್ಥೆಯ ಅಧಿಕಾರಿಗಳಿಗೆ ಸೂಚನೆ ನೀಡಿತು. ಅದರಂತೆ ಸಮಸ್ಯೆಗೆ ಪರಿಹಾರ ಒದಗಿಸಬೇಕೆಂದು ತಾಕೀತು ಮಾಡಿತು. ಅದರಂತೆ ಸ್ಥಳಕ್ಕೆ ಭೇಟಿ ನೀಡಿದ ಕೆಎನ್‌ಆರ್‌ ಸಂಸ್ಥೆಯ ಅಧಿಕಾರಿಗಳು ಹಾನಿಗೀಡಾದ ಪೈಪುಗಳನ್ನು ರವಿವಾರದೊಳಗೆ ಸರಿಪಡಿಸುವ ಭರವಸೆ ನೀಡಿದರು.

LEAVE A REPLY

Please enter your comment!
Please enter your name here