ಉಡುಪಿ : ಉಡುಪಿಯ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರನ್ನು ಹತ್ಯೆ ಮಾಡಿದ ಕಟುಕನನ್ನು ಬಂಧಿಸುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಮಹಾರಾಷ್ಟ್ರ ಮೂಲದ ಪ್ರವೀಣ್ ಅರುಣ್ ಚೌಗಲೆ ಎಂದು ಗುರುತಿಸಲಾಗಿದೆ.
ಉಡುಪಿಯ ಮನೆಯೊಂದಕ್ಕೆ ನುಗ್ಗಿ ಒಂದೇ ಕುಟುಂಬದ ನಾಲ್ವರನ್ನು ಕೇವಲ 10 ನಿಮಿಷದಲ್ಲಿ ಕೊಲೆ ಮಾಡಿ ಪರಾರಿ ಆಗಿದ್ದನು. ಈತ ಕಳೆದ ಎರಡು ದಿನಗಳಿಂದ ಪೊಲೀಸರ ಕಣ್ತಪ್ಪಿಸಿ ಓಡಾಡುತ್ತಿದ್ದನು. ಇಂದು ಮಧ್ಯಾಹ್ನ ಬೆಳಗಾವಿ ಮಾರ್ಗವಾಗಿ ಮಹಾರಾಷ್ಟ್ರ ಇಲ್ಲವೇ ಆಂಧ್ರಕ್ಕೆ ತೆರಳಲು ಹಂತಕ ಪ್ಲ್ಯಾನ್ ಮಾಡಿಕೊಂಡಿದ್ದನು. ಪೊಲೀಸರು ಆತನ ಟೆಕ್ನಿಕಲ್ ಎವಿಡೆನ್ಸ್ ಆಧರಿಸಿ ಖೆಡ್ಡಾಕ್ಕೆ ಕೆಡವಿದ್ದಾರೆ. ಕೊಲೆ ಮಾಡಿ ಊರೂರು ಸುತ್ತುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ.
ಕುಡಚಿಯಲ್ಲಿರುವ ಸಂಬಂಧಿಯೊಬ್ಬರ ಮನೆಯಲ್ಲಿ ಆರೋಪಿ ಅವಿತುಕೊಂಡಿದ್ದು, ಮೊಬೈಲ್ ಟವರ್ ಲೊಕೇಶನ್ ಆಧರಿಸಿ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
ನವೆಂಬರ್ 12 ಭಾನುವಾರದಂದು ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರಿನಲ್ಲಿ ತಾಯಿ ಹಸೀನಾ(46), ಪುತ್ರಿಯರಾದ ಅಫ್ನಾನ್ (23), ಅಯ್ನಾಝ್ (21) ಮತ್ತು ಪುತ್ರ ಆಸೀಮ್ (12) ನನ್ನು ಹತ್ಯೆ ಮಾಡಲಾಗಿತ್ತು.
ಈ ಪ್ರಕರಣಕ್ಕೆ ಸಂಬಂಧಿದಂತೆ ತನಿಖೆ ಕೈಗೊಂಡ ಪೊಲೀಸರು, ಆರೋಪಿಯ ಪತ್ತೆಗಾಗಿ ಬರೋಬ್ಬರಿ 5 ತಂಡಗಳನ್ನು ರಚನೆ ಮಾಡಿದ್ದರು. ಅದರಂತೆ ಇದೀಗ ಕುಡಚಿಯಲ್ಲಿ ಹಂತಕ ಸಿಕ್ಕಿಬಿದ್ದಿದ್ದು, ಪೊಲೀಸರು ಆತನನ್ನು ಉಡುಪಿಗೆ ಕರೆದೊಯ್ದಿದ್ದಾರೆ.