ಸೆಪ್ಟೆಂಬರ್ 29 ರಂದು CWMA ಸಭೆ

0
86

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಸೆಪ್ಟೆಂಬರ್ 29 ರಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಸಭೆ ಕರೆಯಲಾಗಿದೆ. ಪ್ರಾಧಿಕಾರದ ಅಧ್ಯಕ್ಷ ಎಸ್‌ಕೆ ಹಲ್ದಾರ್ ನೇತೃತ್ವದಲ್ಲಿ ದೆಹಲಿಯ ಎಂಟಿಎನ್‌ಎಲ್ ಕಟ್ಟಡದಲ್ಲಿರುವ ಕಚೇರಿಯಲ್ಲಿ ಸಭೆ ನಡೆಯಲಿದೆ.

ಸಭೆಯಲ್ಲಿ ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಪುದುಚೇರಿ ಅಧಿಕಾರಿಗಳು ಭಾಗಿಯಾಗಲಿದ್ದು ಮಂಗಳವಾರ ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿದ ಆದೇಶದ ಪರಿಶೀಲನೆ ಮಾಡಲಾಗುತ್ತದೆ. ಸುದೀರ್ಘ ಚರ್ಚೆ ಬಳಿಕ ಸಿಡಬ್ಲ್ಯುಆರ್‌ಸಿ 18 ದಿನ ನಿತ್ಯ 3,000 ಕ್ಯೂಸೆಕ್ ನೀರು ಹರಿಸಲು ಸೂಚನೆ ನೀಡಿದ್ದು ಇದಕ್ಕೆ ಕರ್ನಾಟಕ ತಮಿಳುನಾಡು ಆಕ್ಷೇಪ ವ್ಯಕ್ತಪಡಿಸಿವೆ.

ಕರ್ನಾಟಕದ ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ 53% ಮಳೆಯ ಕೊರತೆಯಾಗಿದೆ. ಜಲಾಶಯಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದೆ. ಸರ್ಕಾರ ರಾಜ್ಯದ 161 ತಾಲೂಕುಗಳನ್ನು ತೀವ್ರ ಬರ ಪೀಡಿತ ಮತ್ತು 34 ತಾಲೂಕುಗಳನ್ನು ಮಧ್ಯಮ ಬರ ಪೀಡಿತ ಎಂದು ಘೋಷಿಸಿದೆ. ಇದರಲ್ಲಿ, 32 ತೀವ್ರ ಬರ ಪೀಡಿತ ತಾಲೂಕುಗಳು ಮತ್ತು 15 ಮಧ್ಯಮ ಬರ ಪೀಡಿತ ತಾಲೂಕುಗಳು ಕಾವೇರಿ ಜಲಾನಯನ ಪ್ರದೇಶದಲ್ಲಿ ಬರುತ್ತವೆ. ಕರ್ನಾಟಕವು ತನ್ನ ಜಲಾಶಯಗಳಿಂದ ಯಾವುದೇ ನೀರನ್ನು ಬಿಡುಗಡೆ ಮಾಡುವ ಸ್ಥಿತಿಯಲ್ಲಿಲ್ಲ ಎಂದು ಹೇಳಿದೆ.

ಪರಿಸ್ಥಿತಿ ಅವಲೋಕಿಸಿದ್ದ ಕಾವೇರಿ ನೀರು ನಿಯಂತ್ರಣ ಸಮಿತಿ 18 ದಿನ ನಿತ್ಯ 3,000 ಕ್ಯೂಸೆಕ್ ನೀರು ಬಿಡಲು ಶಿಫಾರಸು ಮಾಡಿದೆ. ಇದಕ್ಕೆ 2 ರಾಜ್ಯಗಳು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆ ಈ ಬಗ್ಗೆ ಪರಿಶೀಲಿಸಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಈಗ ಸಭೆ ಕರೆದಿದೆ. ಈ ನಡುವೆ ಈ ಆದೇಶದ ವಿರುದ್ಧ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

LEAVE A REPLY

Please enter your comment!
Please enter your name here