ಕಾವೇರಿಗಾಗಿ ದೆಹಲಿಯಲ್ಲಿ ಕರವೇ ಪ್ರತಿಭಟನೆ

0
107

ದೆಹಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ದೆಹಲಿಯ ಜಂತರ್ ಮಂತರ್ ನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆಯನ್ನು ನಡೆಸಿದೆ.

ರಾಜ್ಯದ ವಿವಿಧ ಭಾಗದಿಂದ ಸೇರಿದ ನೂರಾರು ಕಾರ್ಯಕರ್ತರು ಅಧ್ಯಕ್ಷ ನಾರಾಯಣಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿದರು.

ಪ್ರತಿಭಟನೆಗೂ ಮುನ್ನ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಿವಾಸದಲ್ಲಿ ಸಭೆ ನಡೆಸಿದ ನಾರಾಯಣಗೌಡ ಕೇಂದ್ರ ಸರ್ಕಾರದ ಮಧ್ಯಪ್ರವೇಶದ ಬಗ್ಗೆ ಚರ್ಚೆ ನಡೆಸಿದರು. ಈ ಸಭೆಯಲ್ಲಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಕೂಡಾ ಭಾಗಿಯಾಗಿದ್ದರು. ಕರ್ನಾಟಕ ತಮಿಳುನಾಡು ಒಟ್ಟಾಗಿ ಬಂದಲ್ಲಿ ಮೇಕೆದಾಟು ಯೋಜನೆಗೆ ಅನುಮತಿ ಭರವಸೆ ನೀಡಿದರು.

ಪ್ರತಿಭಟನೆ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಇಂದು ಕಾವೇರಿಗಾಗಿ ಕರ್ನಾಟಕದಿಂದ ದೆಹಲಿಗೆ ಬಂದಿದ್ದೇವೆ. ರಾಜ್ಯದ ಎಲ್ಲ ಜಿಲ್ಲೆಯಿಂದ ನಮ್ಮ ಕಾರ್ಯಕರ್ತರು ಬಂದಿದ್ದಾರೆ. ನಾನು ಇವತ್ತಿನ ನೀರಿನ ಪರಿಸ್ಥಿತಿ, ಕಾವೇರಿ ಪರಿಸ್ಥಿತಿ ಮಾತಾಡೋಕೆ ಬಂದಿಲ್ಲ, ನಾನು ಪ್ರಧಾನ ಮಂತ್ರಿಗಳಿಗೆ, ಪ್ರಹ್ಲಾದ್ ಜೋಶಿ ಅವರಿಗೆ ಹಾಗೂ ನಮ್ಮ ನೀರಾವರಿ ಸಚಿವರ ಬಳಿ ಮಾತನಾಡಲು ಬಂದಿದ್ದೇನೆ ಎಂದು ತಿಳಿಸಿದರು.

ನಮಗೆ ಸಂಕಷ್ಟ ಸೂತ್ರ ಬೇಕು ಅನ್ನೋದರ ಬಗ್ಗೆ ಮಾತಾಡಲು ಬಂದಿದ್ದೇನೆ. ನಮ್ಮ ಬಳಿ ನೀರು ಇದ್ದಾಗ ನಾವು ನೀರು ಕೊಡುತ್ತೇವೆ. ಕರ್ನಾಟಕ-ತಮಿಳುನಾಡು ಅಣ್ಣ-ತಮ್ಮ ತರ ಬದುಕ್ತಾ ಇದೆ. ನಾವು ನೀರು ಕೊಡ್ತೇವೆ. ಆದರೆ ನಮ್ಮ ಬಳಿ ನೀರು ಇಲ್ಲ ಅಂದಾಗ ಏನು ಮಾಡಬೇಕು? ಮಾನ್ಯ ಪ್ರಧಾನಮಂತ್ರಿಗಳು ಮಧ್ಯಸ್ಥಿಕೆ ವಹಿಸಿ, 4 ರಾಜ್ಯದ ಮುಖ್ಯಮಂತ್ರಿಗಳನ್ನು ಕರೆದು ಚರ್ಚೆ ಮಾಡಬೇಕು ಎಂದರು.

ಸಂಕಷ್ಟ ಸೂತ್ರಕ್ಕೆ ಒಂದು ಶಾಶ್ವತ ಪರಿಹಾರ ಹುಡುಕುವಂತಹ ಕೆಲಸವನ್ನು ಮಾನ್ಯ ಮೋದಿಯವರು ಮಾಡಲಿ. ಪ್ರಪಂಚದ ಅನೇಕ ರಾಷ್ಟ್ರಗಳನ್ನು ಒಗ್ಗೂಡಿಸುವ ಕೆಲಸ ಮಾಡುವ ಮೋದಿಯವರು ನಮ್ಮ ದೇಶದ ಒಳಗೆ ಇರುವ ಕರ್ನಾಟಕ-ತಮಿಳುನಾಡು ಮುಖ್ಯಮಂತ್ರಿಗಳನ್ನು ಕರೆದು ಶಾಶ್ವತ ಪರಿಹಾರ ನೀಡಬೇಕು ಎಂದು ಹೇಳಿದರು.

ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಸರ್ಕಾರ ಅನುಮತಿ ನೀಡಿದರೆ ಸುಮಾರು 60 ಟಿಎಂಸಿ ಬೆಂಗಳೂರು ಜನರಿಗೆ ಕುಡಿಯುವ ನೀರಿಗೆ ಬಳಸಿಕೊಳ್ಳಬಹುದು. ತಮಿಳುನಾಡಿಗೆ ನೀರು ಕೊಡಲು ಸಹ ಅನುಕೂಲ ಆಗುತ್ತದೆ. ಎರಡೂ ರಾಜ್ಯ ಒಂದಾಗಿ ಬರುವುದಾದರೆ ಮೇಕೆದಾಟು ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮತಿ ಕೊಡಲಿದೆ ಎಂದು ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಕೇಂದ್ರ ನೀರಾವರಿ ಸಚಿವ ಗಜೇಂದ್ರ ಸಿಂಗ್ ಶೇಖವತ್ ಸಹ ಹೇಳಿದ್ದಾರೆ ಎಂದರು.

ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇನೆ, ನಿಮ್ಮ ಇಂಡಿಯಾ ಒಕ್ಕೂಟದಲ್ಲಿರುವ ಸ್ಟಾಲಿನ್ ಜೊತೆಗೆ ಮಾತನಾಡಿದರೆ ಕಾವೇರಿ ವಿಚಾರವಾಗಿ ಶಾಶ್ವತ ಪರಿಹಾರ ಸಿಗಲಿದೆ. ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿಸುತ್ತೇನೆ ಅಂತ ಜೋಶಿ ಅವರು ಹೇಳಿದ್ದಾರೆ. ಹೀಗಾಗಿ ನಾನು ಇವತ್ತು ದೆಹಲಿಯಲ್ಲೇ ಉಳಿಯುತ್ತೇನೆ. ನಾಳೆ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿ ಎಲ್ಲ ವಿಚಾರಗಳನ್ನು ಪ್ರಸ್ತಾಪಿಸಿ ಮನವಿ ಮಾಡುತ್ತೇನೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here